ಬಿಜಾಪುರ : ಆಲಮಟ್ಟಿ ಹಿನ್ನೀರಿನಿಂದ ಮುಳುಗಡೆಯಾದ ಕೋಲಾರ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಪುನರ್ ವಸತಿ ಅಂಗವಾಗಿ ನಿವೇಶನ, ಹಕ್ಕುಪತ್ರ ನೀಡಿರುವ ಬಗ್ಗೆ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಂಗಳವಾರ ಕೋಲಾರ ಪಟ್ಟಣ ಪಂಚಾಯತಿಯ ಅಧಿಕಾರಿ ಮತ್ತು ಸಿಬ್ಬಂದಿಗಳು, ತಹಶೀಲ್ದಾರ, ಉಪವಿಭಾಗಾಧಿಕಾರಿಗಳೊಂದಿಗೆ ಕೋಲಾರ ಪಟ್ಟಣ ಪಂಚಾಯತಿ ಕಚೇರಿಯಲ್ಲಿ ಸಭೆ ನಡೆಸಿದ ಅವರು ಆಲಮಟ್ಟಿ ಹಿನ್ನೀರಿನಿಂದ ಬಾಧಿತವಾದ ಜನರ ಅನುಕೂಲಕ್ಕಾಗಿ ಕೃಷ್ಣಾ ಭಾಗ್ಯ ಜಲನಿಗಮ ಪುನರ್ ವಸತಿ ಯೋಜನೆಯಡಿ ಅರ್ಹ ಸಂತ್ರಸ್ತತರಿಗೆ ನಿವೇಶನ, ಹಕ್ಕುಪತ್ರ ನೀಡದೆ ಇರುವ ಬಗ್ಗೆ ದೂರುಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಈ ಹಕ್ಕುಪತ್ರ ವಿತರಣೆಗೆ ಸಂಬಂಧಪಟ್ಟಂತೆ ಆಗಿರುವ ಲೋಪಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ಕೋಲಾರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಸಾರ್ವಜನಿಕರು ಯಾವುದೇ ನಿವೇಶನ ಖರೀದಿಸುವಾಗ ಆಸ್ತಿಯ ನೈಜತೆಯನ್ನು ಪರಿಶೀಲಿಸಿ ಖರೀದಿ ಮಾಡುವಂತೆ, ಆಸ್ತಿಯ ಸಂಬಂಧಪಟ್ಟ ಸೂಕ್ತ ದಾಖಲಾತಿಗಳನ್ನು ಮುಖ್ಯಾಧಿಕಾರಿಗಳಿಗೆ ನೀಡುವಂತೆ ಸೂಚಿಸಿದ್ದಾರೆ.
ಅದರಂತೆ ಕೋಲಾರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಹಕ್ಕುಪತ್ರ ವಿತರಣೆಗೆ ಸಂಬಂಧಪಟ್ಟಂತೆ ಆಗಿರುವ ಲೋಪಗಳ ಬಗ್ಗೆ ಕೂಲಂಕೂಷವಾಗಿ ಪರಿಶೀಲಿಸಿ ಅರ್ಹ ಸಂತ್ರಸ್ತರಿಗೆ ಹಕ್ಕುಪತ್ರ ವಿತರಿಸಲಾಗಿದೆಯೆ ಎಂಬುದರ ಬಗ್ಗೆ ಪರಿಶೀಲನೆಗೆ ಇಬ್ಬರು ಅಧಿಕಾರಿಗಳನ್ನು ನೇಮಿಸಿದ್ದು, ಈ ಕುರಿತು ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯ ಮೆಕ್ಕಲಕಿ, ಎಇಇ ಜುಮನಾಳ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.
Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ Facebook । Twitter । YouTube । Instagram ಅನುಸರಿಸಿ..