Gummata Nagari

Bijapur

ಧಾರವಾಡದಲ್ಲಿ ಸ್ಪರ್ಧಿಸಲು ಸ್ವಾಮೀಜಿಗೆ ಪೇಮೆಂಟ್ ಆಗಿದೆ: ಯತ್ನಾಳ್

 

ಧಾರವಾಡ: ಧಾರವಾಡದಲ್ಲಿ ಸ್ಪರ್ಧಿಸಲು ಸ್ವಾಮೀಜಿಗೆ ಪೇಮೆಂಟ್ ಆಗಿದೆ. ಹೀಗಾಗಿ ಎಂಪಿ ಚುನಾವಣೆಯಲ್ಲಿ ಸ್ವಾಮೀಜಿ ಸ್ಪರ್ಧೆ ಮಾಡಿದ್ದಾರೆ. ಯಾರು ಪೇಮೆಂಟ್ ಮಾಡಿದ್ದಾರೆ ಎಂದು ಮೇ 7ರ ಬಳಿಕ ಹೇಳುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿಗೆ ಪೇಮೆಂಟ್ ಆಗಿರುವುದು ಖಚಿತ. ರಾಜ್ಯದಲ್ಲಿ ಸೃಷ್ಟಿಯಾಗುತ್ತಿರುವ ತಾಲಿಬಾನ್ ಮಾದರಿಯ ಸಂಸ್ಕೃತಿ ಇದೆ ಎಂದು ಕಿಡಿಕಾರಿದ್ದಾರೆ.

ದೇಶದ ವಿಚಾರದಲ್ಲಿ ವೀರಶೈವ ಲಿಂಗಾಯತರು ಬಿಜೆಪಿ ಜತೆ ನಿಲ್ಲುತ್ತಾರೆ. ಸ್ವಾಮೀಜಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೆ ಯಾವುದೇ ಸಮಸ್ಯೆಯಿಲ್ಲ. ದಿಂಗಾಲೇಶ್ವರ ಸ್ವಾಮೀಜಿ 5000 ಮತಗಳನ್ನು ಪಡೆಯುತ್ತಾರೆ ಅಷ್ಟೇ. ಹಿಂದೆ ಮಾತೆ ಮಹಾದೇವಿ ಕೂಡ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಅವರು ಎಷ್ಟು ಮತಗಳನ್ನು ಪಡೆದಿದ್ದರು ಎಂದು ಎಲ್ಲರಿಗೂ ಗೊತ್ತಿದೆ. ಹಿಂದೆ ವಿನಯ್ ಕುಲಕರ್ಣಿ ದಿಂಗಾಲೇಶ್ವರ ಶ್ರೀಗಳನ್ನು ತೆಗಳುತ್ತಿದ್ದರು. ಇದೀಗ ಒಳ್ಳೇ ಸ್ವಾಮೀಜಿ ಎಂದು ಹೇಳುತ್ತಿರುವುದನ್ನು ಗಮನಿಸಿದ್ದೇನೆ ಎಂದಿದ್ದಾರೆ.

ಇದನ್ನ ರಾಜ್ಯಪಾಲರು ಗಮನಿಸುತ್ತಿದ್ದಾರೆ. ಎಲ್ಲಾ ಘಟನಾವಳಿಗಳನ್ನು ಕ್ರೂಢೀಕರಿಸಿ ರಾಷ್ಟ್ರಪತಿಯವರಿಗೆ ವರದಿ ಸಲ್ಲಿಸಬೇಕು. ಈ ಕುರಿತು ರಾಜ್ಯಪಾಲರನ್ನು ಭೇಟಿಯಾಗಲು ನಾವು ಮಾತನಾಡುತ್ತಿದ್ದೇವೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್ ಮತದಾರರನ್ನು ಬೆದರಿಸುತ್ತಿದ್ದಾರೆ. ಇಂತಹ ವಿಚಾರಗಳನ್ನು ಚುನಾವಣಾ ಆಯೋಗ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೋಗುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಅಲ್ಲಿ ಮೂವರು ಹಿರಿಯ ನಾಯಕರಿದ್ದಾರೆ. ಅಷ್ಟೊಂದು ದೂರ ಕಾಲು ಚಾಚುವಂತ ವ್ಯಕ್ತಿ ನಾನಲ್ಲ ಎನ್ನುವ ಮೂಲಕ ಯಡಿಯೂರಪ್ಪ ಅವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಈಶ್ವರಪ್ಪ ಸ್ಪರ್ಧೆ ಕುರಿತ ಪ್ರಶ್ನೆಗೆ ಉತ್ತರಿಸಿದ ಯತ್ನಾಳ್, ಅಲ್ಲಿನ ಚುನಾವಣೆಯ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದಿದ್ದಾರೆ.

Most Popular

To Top
error: Content is protected !!